ಬುದ್ಧಿವಂತಿಕೆಯ ಗೆರೆ

ಒಂದು ಸ್ವಯಂ ಸೇವಾ ಸಂಸ್ಥೆ ಯಾವ ಕೆಲಸವನ್ನು ಎಷ್ಟು ಮಾಡಬೇಕು - ಎಲ್ಲಿ ಅದನ್ನು ನಿಲ್ಲಿಸಬೇಕು ಅನ್ನುವುದು ಕುತೂಹಲದ ವಿಷಯ. ಇದು ನಮ್ಮ ಗ್ರಾಮೀಣ ಪ್ರಾಂತದಲ್ಲಿ ಕೆಲಸ ಮಾಡುತ್ತಿರುವ ಒಳ್ಳೆಯ ಸಂಸ್ಥೆಗಳ ಮುಂದೆ ಆಗಾಗ ತಲೆಯೆತ್ತಿ ನಿಲ್ಲುವ ದ್ವಂದ್ವ. ಉತ್ತರ ಭಾರತದ ಅನೇಕ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವ ಪ್ರದಾನ್ [ಪ್ರೊಫೆಷನಲ್ ಅಸಿಸ್ಟೆಂಸ್ ಫರ್ ಡೆವೆಲಪ್ಮೆಂಟ್ ಆಕ್ಷನ್] ಸಂಸ್ಥೆಯ ಕಾರ್ಯಕಲಾಪಗಳು ಹೀಗೆ ಗ್ರಾಮೀಣ ಬಡವರ ಬದುಕಿನ ಅನೇಕ ಮಜಲುಗಳನ್ನು ಮುಟ್ಟಿ ಹೋಗುತ್ತದೆ. ಕೆಲ ವರ್ಷಗಳ ಹಿಂದೆ ನಾನು ಝಾರ್ಖಂಡ್ ರಾಜ್ಯದ ಗೊಡ್ಡಾ ಜಿಲ್ಲೆಗೆ ಅವರ ಕೆಲಸವನ್ನು ನೋಡಲು ಹೋಗಿದ್ದೆ. ಅಲ್ಲಿ ಕೆಲಸ ಪ್ರಾರಂಭವಾದದ್ದು ಸ್ವ-ಸಹಾಯ ಗುಂಪುಗಳನ್ನು ಏರ್ಪಾಟು ಮಾಡಿ ಆ ಮೂಲಕ ಉಳಿತಾಯ-ಸಾಲದ ಚಟುವಟಿಕೆಯನ್ನು ತಮ್ಮ ನಡುವೆಯೇ ನಡೆಸಿಕೊಳ್ಳುವುದರ ಮೂಲಕ. ಆದರೆ ಬಡವರು ಕೇವಲ ಉಳಿತಾಯ ಮಾಡುವುದು - ಸುಲಭವಾಗಿ ಸಾಲ ಪಡೆಯುವುದು - ಈ ಎರಡರಿಂದಾಗಿಯೇ ಅಭಿವೃದ್ಧಿಯಾಗುತ್ತದೆ ಎಂದು ನಾವು ನಂಬುವುದಕ್ಕೆ ಆಗುವುದಿಲ್ಲ. ಏಕೆಂದರೆ ಹೀಗೆ ಸಾಲವಾಗಿ ಪಡೆದ ಹಣವನ್ನು ಹೇಗೆ ಉಪಯೋಗಿಸಬೇಕು ಅದರಿಂದ ಹೇಗೆ ಹೆಚ್ಚು ಆದಾಯ ಪಡೆಯಬೇಕು ಅನ್ನುವ ಪ್ರಶ್ನೆಯನ್ನೂ ನಾವು ಎದುರಿಸಬೇಕಾಗುತ್ತದೆ. ಮೈಕ್ರೋಫೈನಾನ್ಸ್ [ಚಿಕ್ಕಸಾಲ] ದಿಂದ ಲೈವ್ಲಿಹುಡ್ ಫೈನಾನ್ಸ್ [ಜೀವನೋಪಾಧಿಯ ಸಾಲ]ಕ್ಕೆ ಬೆಳೆಯುವ ಬಗ್ಗೆ ಸಾಕಷ್ಟು ಚರ್ಚೆ ಈಚಿನ ದಿನಗಳಲ್ಲಿ ನಡೆಯುತ್ತಿದೆ.




ವೈಟ್ ಹೊಟೇಲ್: ಕೋಣೆಗೊಬ್ಬ ಕಲಾವಿದ - ಕಲಾವಿದನಿಗೊಂದು ಕೋಣೆ.

ಛಳಿಗಾಲದಲ್ಲಿ ನಡುಗಾಡುತ್ತಾ ಇಲ್ಲಿಗೆ ಬಂದು ಪಾಠಮಾಡುವುದು ಗಮ್ಮತ್ತಿನ ವಿಷಯವೇನೂ ಅಲ್ಲ. ಭಾಷೆ ಬಾರದ, ಊಟ ಒಗ್ಗದ, ಈ ಜಾಗದಲ್ಲಿ ನಾನು ಅನಕ್ಷರಸ್ಥ - ಬರೇ ಫ್ರೆಂಚ್ ಮತ್ತು ಫ್ಲೆಮಿಷ್ ಮಾತನಾಡುವ ಈ ಬಹುಭಾಷಾ ನಗರದಲ್ಲಿ ನಾನು ಇಳಿದಾಗಲೆಲ್ಲಾ ಒಂದೊಂದು ಹೆಜ್ಜೆಗೂ ಜನರನ್ನು ಮುಂದಿನ ಅಡಿ ಎಲ್ಲಿಡಬೇಕೆಂದು ಕೇಳಿಕೊಳ್ಳುತ್ತಾ ನಡೆಯಬೇಕು. ನಕ್ಷೆಗಳನ್ನು ನೋಡಿ ಓಡಾಡುವ ಜನರ ಮಧ್ಯೆ ಮತ್ತೆ ಮತ್ತೆ ದಾರಿ ಕೇಳುವ ವಿಚಿತ್ರಕ್ಕಿಳಿಯಬೇಕು. ಹಲವು ಬಾರಿ ನಕ್ಷೆಗಳೂ ಅವರ ಭಾಷೆಯಲ್ಲೇ ಇರುತ್ತವೆ. ಹೋಗಲಿ ಕಂಪ್ಯೂಟರನ್ನು ತಗೆದು ಗೂಗಲ್ ಭಗವಾನನ ಮೊರೆ ಹೋಗಬೇಕೆಂದರೆ ಆತನೂ ಸ್ಥಳೀಯ ಭಾಷೆಯನ್ನು ಬಿಟ್ಟು ಆಂಗ್ಲಕ್ಕೆ ಬರಲು ಸಮಯ ತೆಗೆದುಕೊಳ್ಳುತ್ತಾನೆ. ಹೀಗೆ ೨೪ ರಾಷ್ಟ್ರಗಳ ಪ್ರತಿನಿಧಿಸುವ ವಿದ್ಯಾರ್ಥಿವೃಂದಕ್ಕೆ ಭಾರತೀಯ ಮೈಕ್ರೊಫೈನಾನ್ಸ್ ಬಗ್ಗೆ ಲೆಕ್ಚರುಗಳನ್ನು ಕುಟ್ಟುವುದು ಸುಲಭವಲ್ಲ. ಮೊದಲ ದಿನದಂದೇ ನಾನು ಕ್ಲಾಸಿಗೆ ಹೇಳಿಬಿಟ್ಟೆ.