Showing posts with label ಪ್ರದಾನ್. Show all posts
Showing posts with label ಪ್ರದಾನ್. Show all posts

ಮ್ಯಾಗ್ಸಸೇ ಪ್ರಶಸ್ತಿ ಪಡೆದ ದೀಪ್ ಜೋಶಿ ಮತ್ತು ಅವರು ಬೆಳೆಸಿದ ಪ್ರದಾನ್ ಸಂಸ್ಥೆ


ಏಶಿಯಾದ ನೊಬೆಲ್ ಎಂದೇ ಪ್ರಖ್ಯಾತವಾಗಿರುವ ರ್‍ಯಾಮನ್ ಮ್ಯಾಗಸಸೇ ಪುರಸ್ಕಾರವನ್ನು ಈ ಬಾರಿ ಪಡೆದವರಲ್ಲಿ ಭಾರತೀಯ ದೀಪ್ ಜೋಶಿ ಸಹ ಸೇರಿದ್ದಾರೆ. ಎಂದೂ ತಮ್ಮ ಧ್ವನಿಯನ್ನು ಏರಿಸದ, ಬೆಳ್ಳಿಗಡ್ಡಧಾರಿ, ಒಂದು ಥರದಲ್ಲಿ ಋಷಿಯ ಅವತಾರದಂತಿರುವ ಹಿರಿಯ ದೀಪ್‍ಗೆ ಈ ಪುರಸ್ಕಾರ ಬಂದದ್ದು ಸಹಜವೂ ಸಮರ್ಪಕವೂ ಆಗಿದೆ. ಯಾವ ಆರ್ಭಟವೂ ಇಲ್ಲದೇ, ಎಲ್ಲವನ್ನೂ ಒಂದು ಸ್ಪಷ್ಟ ಆಲೋಚನೆ, ದೂರದರ್ಶಿತ್ವದಿಂದ ಯೋಜನಾಬದ್ಧವಾಗಿ ಕಾರ್ಯರೂಪಕ್ಕಿಳಿಸಿರುವ ದೀಪ್‍ ಒಂದು ರೀತಿಯಿಂದ ಅಜಾತ ಶತ್ರು. ಅವರ ಬಗ್ಗೆ ಕುಹಕದ ಧ್ವನಿಯಾಗಲೀ, ಬೇಸರದ ಧ್ವನಿಯಾಗಲೀ ನಾನು ಈ ವರೆಗೆ ಕೇಳಿಯೇ ಇಲ್ಲ. ಆದರೆ ದೀಪ್ ಜೋಶಿಯ ಮಹತ್ವವನ್ನು ಅರ್ಥಮಾಡಿಕೊಳ್ಳಲು ನಾವು ಆತನ ಜೀವನದಲ್ಲಿ ಹಣಕಿಹಾಕದೇ ಆತನ ಕೆಲಸ ಮತ್ತು ಆತ ನಡೆಸಿದ ಸಂಸ್ಥೆಯ ನಿಲುವನ್ನು ಅರ್ಥಮಾಡಿಕೊಳ್ಳುವುದರಲ್ಲಿಯೇ ಮ್ಯಾಗಸಸೆಯ ಮಹತ್ವವೂ ಇದೆ.






ಬುದ್ಧಿವಂತಿಕೆಯ ಗೆರೆ

ಒಂದು ಸ್ವಯಂ ಸೇವಾ ಸಂಸ್ಥೆ ಯಾವ ಕೆಲಸವನ್ನು ಎಷ್ಟು ಮಾಡಬೇಕು - ಎಲ್ಲಿ ಅದನ್ನು ನಿಲ್ಲಿಸಬೇಕು ಅನ್ನುವುದು ಕುತೂಹಲದ ವಿಷಯ. ಇದು ನಮ್ಮ ಗ್ರಾಮೀಣ ಪ್ರಾಂತದಲ್ಲಿ ಕೆಲಸ ಮಾಡುತ್ತಿರುವ ಒಳ್ಳೆಯ ಸಂಸ್ಥೆಗಳ ಮುಂದೆ ಆಗಾಗ ತಲೆಯೆತ್ತಿ ನಿಲ್ಲುವ ದ್ವಂದ್ವ. ಉತ್ತರ ಭಾರತದ ಅನೇಕ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವ ಪ್ರದಾನ್ [ಪ್ರೊಫೆಷನಲ್ ಅಸಿಸ್ಟೆಂಸ್ ಫರ್ ಡೆವೆಲಪ್ಮೆಂಟ್ ಆಕ್ಷನ್] ಸಂಸ್ಥೆಯ ಕಾರ್ಯಕಲಾಪಗಳು ಹೀಗೆ ಗ್ರಾಮೀಣ ಬಡವರ ಬದುಕಿನ ಅನೇಕ ಮಜಲುಗಳನ್ನು ಮುಟ್ಟಿ ಹೋಗುತ್ತದೆ. ಕೆಲ ವರ್ಷಗಳ ಹಿಂದೆ ನಾನು ಝಾರ್ಖಂಡ್ ರಾಜ್ಯದ ಗೊಡ್ಡಾ ಜಿಲ್ಲೆಗೆ ಅವರ ಕೆಲಸವನ್ನು ನೋಡಲು ಹೋಗಿದ್ದೆ. ಅಲ್ಲಿ ಕೆಲಸ ಪ್ರಾರಂಭವಾದದ್ದು ಸ್ವ-ಸಹಾಯ ಗುಂಪುಗಳನ್ನು ಏರ್ಪಾಟು ಮಾಡಿ ಆ ಮೂಲಕ ಉಳಿತಾಯ-ಸಾಲದ ಚಟುವಟಿಕೆಯನ್ನು ತಮ್ಮ ನಡುವೆಯೇ ನಡೆಸಿಕೊಳ್ಳುವುದರ ಮೂಲಕ. ಆದರೆ ಬಡವರು ಕೇವಲ ಉಳಿತಾಯ ಮಾಡುವುದು - ಸುಲಭವಾಗಿ ಸಾಲ ಪಡೆಯುವುದು - ಈ ಎರಡರಿಂದಾಗಿಯೇ ಅಭಿವೃದ್ಧಿಯಾಗುತ್ತದೆ ಎಂದು ನಾವು ನಂಬುವುದಕ್ಕೆ ಆಗುವುದಿಲ್ಲ. ಏಕೆಂದರೆ ಹೀಗೆ ಸಾಲವಾಗಿ ಪಡೆದ ಹಣವನ್ನು ಹೇಗೆ ಉಪಯೋಗಿಸಬೇಕು ಅದರಿಂದ ಹೇಗೆ ಹೆಚ್ಚು ಆದಾಯ ಪಡೆಯಬೇಕು ಅನ್ನುವ ಪ್ರಶ್ನೆಯನ್ನೂ ನಾವು ಎದುರಿಸಬೇಕಾಗುತ್ತದೆ. ಮೈಕ್ರೋಫೈನಾನ್ಸ್ [ಚಿಕ್ಕಸಾಲ] ದಿಂದ ಲೈವ್ಲಿಹುಡ್ ಫೈನಾನ್ಸ್ [ಜೀವನೋಪಾಧಿಯ ಸಾಲ]ಕ್ಕೆ ಬೆಳೆಯುವ ಬಗ್ಗೆ ಸಾಕಷ್ಟು ಚರ್ಚೆ ಈಚಿನ ದಿನಗಳಲ್ಲಿ ನಡೆಯುತ್ತಿದೆ.





ನನಗೂ ಕೇಸ್ಲಾಗೂ ಅಂಟಿದ ನಂಟು

ಪಾಠ-ಪ್ರವಚನ ಮಾಡುವ ನನ್ನಂತಹವರಿಗೆ ಎಲ್ಲೆಲ್ಲಿ ಪಾಠ ಮಾಡಲು ಅವಕಾಶ ಸಿಗುತ್ತದೆ ಎಂದು ಹೇಳುವುದಕ್ಕೆ ಸಾದ್ಯವಿಲ್ಲ. ಪ್ರವಚನಕಾರರಂತೆಯೇ ಪಾಠಮಾಡುವವರೂ ಸಹ ಒಂದು ಗುಂಪಿನ ಕೇಳುಗರು ಸಿಕ್ಕಿದರೆ ಸಾಕು ತಮ್ಮ ಪುಂಗಿಯೂದುವುದಕ್ಕೆ ಪ್ರಾರಂಭಿಸುತ್ತಾರೇನೋ! ಆದರೆ ಸಾಮಾನ್ಯವಾಗಿ ಕ್ಯಾಂಪಸ್ ಬಿಟ್ಟು ಹೊರಗೆ ಹೋಗಿ ಪಾಠ ಮಾಡುವಾಗ ಒಂದು ಟೀಂ ಅಂತ ಇರುತ್ತದೆ. ಇಬ್ಬರಾದರೂ ಇರುವುದರಿಂದ ನಮಗೆ ಒಂದು ಥರದ ಕಂಪನಿ ಇರುತ್ತದೆ. ಆದರೆ ಒಮ್ಮೊಮ್ಮೆ ಅದೂ ಸಾಧ್ಯವಾಗುವುದಿಲ್ಲ. ಸ್ವಯಂ ಸೇವಾ ಸಂಸ್ಥೆಗಳವರು ಯಾರಾದರೂ ಹೀಗೆ ತರಬೇತಿ ಕಾರ್ಯಕ್ರಮನನ್ನು ಮಾಡಿ ಎಂದು ಕೇಳಿದಾಗಲೇ ಹೆಚ್ಚಿನ ಪೀಕಲಾಟಕ್ಕೆ ಬರುವುದು. ಯಾಕೆಂದರೆ ಅಂಥ ಸಂಸ್ಥೆಗಳಿಗೆ ಹೋಗುವಾಗ ಈ ಟೀಂ ಕೈಕೊಡುತ್ತದೆ. ಅವರು ಕೊಡುವ ಹಣ ಹೆಚ್ಚಲ್ಲವಾದ್ದರಿಂದ ನನ್ನ ಸಹಚರರಿಗೆ ಆಸಕ್ತಿ ಕಡಿಮೆಯೂ ಆಗಬಹುದು. ಜೊತೆಗೆ ಸ್ವಯಂ ಸೇವಾ ಸಂಸ್ಥೆಗಳವರ ಟ್ರೈನಿಂಗ್ ವಿಭಾಗಗಳು ದೂರದ ಜಾಗಗಳಲ್ಲಿರುತ್ತವೆ. ಅಥವಾ ನಗರದಲ್ಲಿದ್ದರೂ ಅಲ್ಲಿ ನಮಗೆ ಬೇಕಾದ ಪರಿಕರಗಳೆಲ್ಲವೂ ಸುಲಭವಾಗಿ ಸಿಗುವುದಿಲ್ಲ. ಒಂದು ಥರದಲ್ಲಿ ಈಡನ್ ಗಾರ್ಡನ್, ಚಿನ್ನಸ್ವಾಮಿ ಸ್ಟೇಡಿಯಂನಂತಹ ಜಾಗದಲ್ಲಿ ಅಂತರರಾಷ್ಟ್ರೀಯ ಮ್ಯಾಚುಗಳನ್ನು ಆಡಿದವರನ್ನು ಕಾಲೇಜಿನ ಮೈದಾನದಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಆಡಲು ಕೇಳಿದಂತೆ. ಒಂದೆರಡು ಬಾರಿ ತಮಾಷೆಗೆಂದು ಆ ಆಟ ಚೆನ್ನಾಗಿರುತ್ತದಾದರೂ ಇದನ್ನು ಇಡೀ ಟೀಮು ಆಡುವುದನ್ನು ಊಹಿಸುವುದು ಕಷ್ಟ. ಹೀಗಾಗಿ ಸ್ವಯಂ ಸೇವಾ ಸಂಸ್ಥೆಗಳು ಈ ರೀತಿಯ ತರಬೇತಿಯ ಕೋರಿಕೆಯನ್ನು ನಮ್ಮ ಮುಂದಿಟ್ಟಾಗ ಮಾಡಬೇಕೆನ್ನಿಸಿದರೂ, ಅದನ್ನು ಕಾರ್ಯರೂಪಗೊಳಿಸುವುದು ಸ್ವಲ್ಪ ಕಷ್ಟವೇ.