ಯಶವಂತ ಚಿತ್ತಾಲರಿಗೆ ಪಂಪ ಪ್ರಶಸ್ತಿ ಬಂದಿದೆ ಅನ್ನುವುದು ಖುಶಿಯ ವಿಷಯ. ದೂರದೂರಿನಲ್ಲಿ ಕೂತು ತಮ್ಮಷ್ಟಕ್ಕೆ ತಾವು ಕೆಲಸ ಮಾಡುತ್ತಿರುವ ಚಿತ್ತಾಲರು ಯಾವ ಪ್ರಶಸ್ತಿಯನ್ನೂ ಅಟ್ಟಿಸಿಕೊಂಡು ಹೋದವರಲ್ಲ. ಅಥವಾ ಅಲ್ಲಿ ಇಲ್ಲಿ ಸೆಮಿನಾರುಗಳಲ್ಲಿ ಕಾಣಿಸಿಕೊಂಡವರಲ್ಲ. ತಮ್ಮಷ್ಟಕ್ಕೆ ತಾವು ಬ್ಯಾಂಡ್ಸ್ಟಾಂಡಿನಲ್ಲಿ ಕೂತು ಸಾಹಿತ್ಯದ ಬಗ್ಗೆ ಸದಾ ಚಿಂತಿಸುತ್ತ, ಹೊಸ ಸಾಹಿತ್ಯವನ್ನು ಬೆರಗಿನಿಂದ ನೋಡುತ್ತಾ, ಕ್ರಿಕೆಟ್ ಮ್ಯಾಚುಗಳನ್ನು ಚಾಚೂ ಬಿಡದೇ ನೋಡುತ್ತಾ ಶಿಸ್ತಿನ ಜೀವನವನ್ನು ಜೀವಿಸುತ್ತಿರುವವರು. ಕಣ್ಣಿಗೆ ಬೀಳದಿರುವ ವ್ಯಕ್ತಿಗಳನ್ನು ನಾವು ಬಹುತೇಕ ಮರೆತುಬಿಡುತ್ತೇವೆ. ಹಾಗೆ ಮರೆಯದಿರುವಂತೆ ಸದಾ ನೆನಪಿನಲ್ಲಿ ಉಳಿಯಬೇಕಾದರೆ ಎರಡು ಮಾರ್ಗಗಳು ಮಾತ್ರ ಇವೆ. ಒಂದು: ಚಿತ್ತಾಲ, ರಾಘವೇಂದ್ರ ಖಾಸನೀಸ, ದೇವನೂರ ಮಹಾದೇವ -- ಇಂಥವರ ಥರ ಅದ್ಭುತ ಪ್ರತಿಭೆ ಇರಬೇಕು, ಇಲ್ಲವೇ ಆಗಾಗ ಏನಾದರೊಂದು ಬರೆದು ಜನರ ಗಮನವನ್ನು ಸೆಳೆಯುತ್ತಿರಬೇಕು. ಚಿತ್ತಾಲರಿಗೆ ಅದ್ಭುತ ಪ್ರತಿಭೆಯೂ ಇದೆ, ಜೊತೆಗೆ ನಿರಂತರ ಒಳ್ಳೆಯ ಕೃತಿಗಳನ್ನು ಸಾಹಿತ್ಯಕ್ಕರ್ಪಿಸುವ ಶಿಸ್ತೂ ಇದೆ. ಹೀಗಾಗಿಯೇ ಅವರು ಒಂದಕ್ಕಿಂದ ಒಂದು ಉತ್ತಮ ಕೃತಿಗಳನ್ನು ನಮಗೆ ನೀಡುತ್ತಾ, ನಮ್ಮನ್ನೆಲ್ಲ ಪ್ರೋತ್ಸಾಹಿಸುತ್ತಾ, ಹುರುದುಂಬಿಸುತ್ತಾ ಬೆಳೆದು ನಿಂತಿದ್ದಾರೆ.
ಮುಂದೆ...