ಈಚೆಗಷ್ಟೇ ನಾನು ಗುರುವಿನ ಶಕುಂತಳಾ ಪುಸ್ತಕ ಬಿಡುಗಡೆಯ ಸಂದರ್ಭದಲ್ಲಿ ಹಾಕಿಕೊಂಡಿದ್ದ ಟಿಪ್ಪಣಿಗಳಾಧಾರದ ಮೇಲೆ ಅವರ ಬಗೆಗೆ ಬರೆದಿದ್ದೆ. ಆ ಬರಹದ ಕಡೆಯ ಸಾಲುಗಳಿಂದ ಅವರ ಈ ವರೆಗಿನ ಬರವಣಿಗೆಯ ಅವಲೋಕನ ಮಾಡುತ್ತೇನೆ.
"ಗುರುಪ್ರಸದ್ ನನ್ನ ಮಟ್ಟಿಗೆ ಕನ್ನಡದಲ್ಲಿ ಬರೆಯುತ್ತಿರುವ ಸಮಕಾಲೀನರಲ್ಲಿ ಒಂದು ಭಿನ್ನ ಧ್ವನಿ ಅನ್ನುವುದರಲ್ಲಿ ಅನುಮಾನವಿಲ್ಲ. ಆದರೆ ಭಿನ್ನತೆಯೊಂದೇ ಅವರ ಗುಣವಲ್ಲ. ಅವರಿಗೆ ಕಥೆ ಕಟ್ಟುವ ಕಲೆ ಕೈವಶವಾಗಿದೆ. ಅವರ ಸಂದರ್ಭಕ್ಕೆ ತಕ್ಕಂತೆ ಮಾನವ ವ್ಯಾಪಾರಗಳ ಬಗ್ಗೆ ಅದರ ಅರ್ಥಹೀನತೆ-ಅರ್ಥವಂತಿಕೆಯ ಬಗ್ಗೆ ಅವರು ಸಮರ್ಥವಾಗಿ ಬರೆಯಬಲ್ಲರು. ಗ್ಲೋಬಲ್ ಆಗುತ್ತಿರುವ ನಮ್ಮ ಸಮಾಜದ ತಲ್ಲಣಗಳನ್ನು ಅವರು ಸೂಕ್ಷ್ಮವಾಗಿ ಗ್ರಹಿಸಬಲ್ಲರು. ಕನ್ನಡ ಲೋಕ ಅವರನ್ನು ಉತ್ಸಾಹದಿಂದ ಬರಮಾಡಿಕೊಂದು ಪ್ರೋತ್ಸಾಹಿಲಿ ಅನ್ನುವ ಆಶಯ ನನ್ನದು. ಈ ಮುಖ್ಯವಾದ ಧ್ವನಿಗೆ ಸಿಗಬೇಕಾದ ಪ್ರಾಮುಖ್ಯತೆ ಸಿಗಲೆಂದು ಹಾರೈಸುತ್ತೇನೆ."
ಹೀಗೆ ಬರೆಯುತ್ತಿದ್ದಾಗ ನನಗೆ ಗುರುವಿನ ಮಿಕ್ಕ ಕೃತಿಗಳ ಪರಿಚಯವಿರಲಿಲ್ಲ. ಅವರ ಕಾದಂಬರಿ ಬಿಳಿಯ ಚಾದರ ಬಿಡುಗಡೆಯಾಗಿರಲಿಲ್ಲ ಹಾಗೂ ಅವರ ಎರಡೂ ಪುಸ್ತಕಗಳಾದ ನಿರ್ಗುಣ ಮತ್ತು ಪ್ರಬಂಧಗಳ ಸಂಕಲನವಾದ ವೈದ್ಯ-ಮತ್ತೊಬ್ಬ ನಾನು ಓದಿರಲಿಲ್ಲ. ಈಗ ನಾನು ಅವುಗಳೆಲ್ಲವನ್ನೂ ಓದಿದ್ದೇನೆ. ಓದಿದ ನಂತರವೂ ನನ್ನ ಮೇಲಿನ ಅಭಿಪ್ರಾಯದಲ್ಲಿ ಮೂಲಭೂತ ಬದಲಾವಣೆಯೇನೂ ಆಗಿಲ್ಲ. ಆದರೂ ಒಬ್ಬ ಲೇಖಕನ ಕಾಳಜಿಗಳು ಹಾಗೂ ಬರಹಗಾರ ತೆರೆದುಕೊಳ್ಳುವ ರೀತಿಯಬಗ್ಗೆ ಕೆಲ ಒಳನೋಟಗಳನ್ನು ನಾನು ಈ ಹೊಸ ಓದಿನ ಮೂಲಕ ಪಡೆಯಲು ಪ್ರಯತ್ನಿಸುತ್ತಿದ್ದೇನೆ.